ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದ ಮೇಲೆ ED (enforcement directorate) ದಾಳಿ ನಡೆದು ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಆಮ್ ಆದ್ಮಿ ಪಕ್ಷ ಹೇಳಿದೆ

Waves of Karnataka


 ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದ ಮೇಲೆ ED (enforcement directorate) ದಾಳಿ ನಡೆದು ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಆಮ್ ಆದ್ಮಿ ಪಕ್ಷ ಹೇಳಿದೆ.

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಮನ್ಸ್ ಜಾರಿಗೊಳಿಸಿದ್ದರೂ ವಿಚಾರಣೆಗೆ ದೆಹಲಿ ಸಿಎಂ ಗೈರಾಗಿದ್ದರು. ಈಗ ಇದೇ ಪ್ರಕರಣದಲ್ಲಿ ದೆಹಲಿ ಸಿಎಂ ಕೇಜ್ರಿವಾಲ್ ಅವರನ್ನು ಬಂಧಿಸುವ ಸಾಧ್ಯತೆ ಇದೆ, ಅವರ ನಿವಾಸಕ್ಕೆ ಸಂಪರ್ಕ್ಪ ಕಲ್ಪಿಸುವ ರಸ್ತೆ ಪ್ರವೇಶಿಸದಂತೆ ದೆಹಲಿ ಪೊಲೀಸರು ನಿರ್ಬಂಧ ವಿಧಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.

ಈ ಹಿಂದೆಯೂ ಕೇಜ್ರಿವಾಲ್ ಗೆ ನ.02 ಹಾಗೂ ಡಿ.21 ರಂದು ವಿಚಾರಣೆಗೆ ಹಾಜರಾಗಲು ಸಮನ್ಸ್ ಜಾರಿಗೊಳಿಸಲಾಗಿತ್ತು. ತನಿಖಾ ಸಂಸ್ಥೆಯಿಂದ ಸಿಎಂ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ನಡೆಯಲಿದೆ. ಇದಾದ ಕೆಲವೇ ಗಂಟೆಗಳಲ್ಲಿ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಆಮ್ ಆದ್ಮಿ ಪಕ್ಷದ ನಾಯಕ, ಸಚಿವ ಅತಿಶಿ ಟ್ವಿಟರ್ ನಲ್ಲಿ ಬರೆದಿದ್ದಾರೆ.2024 ರ ಲೋಕಸಭಾ ಚುನಾವಣೆಯಲ್ಲಿ ಕೇಜ್ರಿವಾಲ್ ಪ್ರಚಾರ ಮಾಡದಂತೆ ತಡೆಯುವುದಕ್ಕಾಗಿ ಇದನ್ನೆಲ್ಲಾ ಮಾಡಲಾಗುತ್ತಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.

ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮದ್ಯದ ಕಂಪನಿಗಳು ಭಾಗಿಯಾಗಿವೆ, ಇದರಿಂದ ಅವರಿಗೆ ಶೇ.12 ರಷ್ಟು ಲಾಭ ಇದೆ ಎಂದು ಸಿಬಿಐ ಪ್ರತಿಪಾದಿಸುತ್ತಿದೆ. "ಸೌತ್ ಗ್ರೂಪ್" ಎಂದು ಸಿಬಿಐ ಹೇಳಿರುವ ಮದ್ಯದ ಲಾಬಿ ಕಿಕ್‌ಬ್ಯಾಕ್‌ಗಳನ್ನು ಪಾವತಿಸಿದೆ, ಅದರಲ್ಲಿ ಒಂದು ಭಾಗವನ್ನು ಸಾರ್ವಜನಿಕ ಸೇವೆಯಲ್ಲಿರುವವರಿಗೂ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು ಜಾರಿ ನಿರ್ದೇಶನಾಲಯ ಈ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂದು ಆರೋಪಿಸಿದೆ.