ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದಿರುವ ಕೋವಿಡ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ವಿಶೇಷ ತನಿಖಾ ತಂಡ(ಎಸ್ಐಟಿ) ರಚನೆ ಮಾಡಲು ಸಚಿವ ಸಂಪುಟ ಸಭೆ ತೀರ್ಮಾನ ಕೈಗೊಂಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, ಎಸ್ಐಟಿ ಜೊತೆಗೆ ಸಚಿವ ಸಂಪುಟ ಉಪ ಸಮಿತಿಯೊಂದನ್ನು ರಚನೆ ಮಾಡಲಾಗುವುದು ಎಂದು ಹೇಳಿದರು. ಕೋವಿಡ್ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನ್ಯಾ.ಮೈಕಲ್ ಡಿ.ಕುನ್ಹಾ ಅವರ ವಿಚಾರಣಾ ಆಯೋಗ ಸರ್ಕಾರಕ್ಕೆ ಮಧ್ಯಂತರ ವರದಿ ನೀಡಿದೆ. ಅದರ ಆಧಾರದ ಮೇಲೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಕೆಲವು ನಿರ್ಣಯಗಳನ್ನು ತೆಗೆದುಕೊಂಡಿದ್ದೇವೆ. ಪ್ರಮುಖವಾಗಿ ಇದರಲ್ಲಿ ಕ್ರಿಮಿನಲ್ ಅಂಶಗಳು ಇರುವ ಹಿನ್ನೆಲೆಯಲ್ಲಿ ಎಸ್ಐಟಿ ರಚನೆ ಮಾಡಲು ನಿರ್ಧರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ವಿಚಾರಣಾ ಆಯೋಗವು 11 ಸಂಪುಟಗಳಲ್ಲಿ ವರದಿ ನೀಡಿದೆ. 7223.64 ಕೋಟಿ ರೂ.ಮೊತ್ತದ ಅವ್ಯವಹಾರ ಆಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಅಲ್ಲದೆ, 500 ಕೋಟಿ ರೂ.ಗಳನ್ನು ಸಂಬಂಧಪಟ್ಟವರಿಂದ ವಸೂಲು ಮಾಡುವಂತೆ ಶಿಫಾರಸ್ಸು ಮಾಡಿದೆ. ಅದರಂತೆ, ಸಂಬಂಧಪಟ್ಟವರಿಂದ ಹಣ ವಸೂಲು ಮಾಡುವ ಪ್ರಕ್ರಿಯೆಯನ್ನು ತಕ್ಷಣ ಪ್ರಾರಂಭಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಎಚ್.ಕೆ.ಪಾಟೀಲ್ ಹೇಳಿದರು
